ಯಡಿಯೂರಪ್ಪ ಕುಟುಂಬ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದಕ್ಕೆ ಮಹತ್ವದ ಸಾಕ್ಷಿಗಳು ಲಭ್ಯ : ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ಮತ್ತೊಮ್ಮೆ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದೆ ಎನ್ನುವುದಕ್ಕೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ಮತ್ತೊಮ್ಮೆ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದೆ ಎನ್ನುವುದಕ್ಕೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ. ಮುಖ್ಯಮಂತ್ರಿಗಳು ತಾವು ಪ್ರಾಮಾಣಿಕರಾಗಿದ್ದರೆ ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲು ಏಕೆ ನಿರಾಕರಿಸುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಸಾಲದ ಮೇಲೆ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ. ಕೇಂದ್ರದಿಂದ ಬರಬೇಕಾದ ಯಾವ ಅನುದಾನವನ್ನೂ ಕೇಳುವ ಧೈರ್ಯ ಬಿಜೆಪಿ ಸಚಿವರಿಗಾಗಲೀ, ಶಾಸಕರಿಗಾಗಲೀ ಅಥವಾ ಸಂಸದರಿಗಾಗಲೀ ಇಲ್ಲ. ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಒಂದೆಡೆ ಕೊರೊನಾದಿಂದ ಜನ ಸಾಯುತ್ತಿದ್ದಾರೆ, ಇತ್ತ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಬಡ ವಿದ್ಯಾರ್ಥಿಗಳಿಗೆ ವಿತರಿಸುವ ಲ್ಯಾಪ್ಟಾಪ್, ವೈದ್ಯಕೀಯ ಉಪಕರಣಗಳ ಖರೀದಿ ಸೇರಿ ಎಲ್ಲಿ ಸಾಧ್ಯವೋ ಅಲ್ಲೆಲ್ಲಾ ಬರೀ ಭ್ರಷ್ಟಾಚಾರ. ಹೆಣಗಳ ಮೇಲೆ ದುಡ್ಡು ಮಾಡುವ ಇಂಥ ಸರ್ಕಾರವನ್ನು ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲು ನೋಡುತ್ತಿರೋದು ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳಿಂದಾಗಿ ನಾಡಿನ ಜನ ಯಾಕಾದ್ರೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ ಎಂದು ಹೇಳಿದ್ದಾರೆ.
0 التعليقات: