ರೈತರಿಗೆ ಬೆಂಬಲ ಸೂಚಿಸಿ ರಾಜಭವನಕ್ಕೆ ರಾಜಸ್ಥಾನ ಕಾಂಗ್ರೆಸ್ ಮುತ್ತಿಗೆ
ಜೈಪುರ: ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷವು ರಾಜಸ್ಥಾನ ರಾಜಭವನಕ್ಕೆ ಶುಕ್ರವಾರ(ಇಂದು) ಮುತ್ತಿಗೆ ಹಾಕಲಿದೆ.
ಪಕ್ಷದ ರಾಜ್ಯ ಘಟಕದ ಮುಖಂಡರು ಮತ್ತು ಕಾರ್ಯಕರ್ತರು ಶುಕ್ರವಾರ 'ಕಿಸಾನ್ ಅಧಿಕಾರ್ ದಿವಸ್' ಆಚರಿಸಲಿದ್ದಾರೆ. ಆ ಪ್ರಯುಕ್ತ ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ರ ವರೆಗೆ ರಾಜಭವನಕ್ಕೆ ಮುತ್ತಿಗೆ ಹಾಕಿ ಕೇಂದ್ರದ ಮೇಲೆ ಒತ್ತಡ ಹೇರುವುದಾಗಿ ರಾಜಸ್ಥಾನ ಕಾಂಗ್ರೆಸ್ ತಿಳಿಸಿದೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜಸ್ಥಾನದ ಉಸ್ತುವಾರಿ ಅಜಯ್ ಮಾಕೆನ್, ರಾಜಸ್ಥಾನ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದ್ ಸಿಂಗ್ ದೋಟಾಸ್ರಾ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಪಕ್ಷದ ಪ್ರಮುಖ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕೃಷಿ ಕಾಯ್ದೆಗಳಿಗೆ ಸಂಬಂಧಿಸಿದಂತೆ ದೆಹಲಿಯ ವಿಜ್ಞಾನ ಭವನದಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ಶುಕ್ರವಾರ ನಡೆದ ಎಂಟನೇ ಸುತ್ತಿನ ಮಾತುಕತೆಯೂ ಸಹ ವಿಫಲವಾಗಿತ್ತು. 9ನೇ ಸುತ್ತಿನ ಮಾತುಕತೆಯು ಜನವರಿ 15ರಂದು ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿತ್ತು.
ಜನವರಿ 26ರ ಒಳಗೆ ನಮ್ಮ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಗಣರಾಜ್ಯೋತ್ಸವದಂದು ದೆಹಲಿಗೆ ನುಗ್ಗುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ. ಅದರಂತೆ ರಾಜಧಾನಿಯ ಹೊರವಲಯದಲ್ಲಿ ಗುರುವಾರ ಟ್ರಾಕ್ಟರ್ ತಾಲೀಮು ಆರಂಭವಾಗಿದೆ.
0 التعليقات: